
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆ ನಂತರ ರಾಜ್ಯ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ, ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೂತನ ಕಮಿಷನರ್ ಆಗಿ ನೇಮಕ ಮಾಡಿದೆ.
ಜಾರ್ಖಂಡ್ ಮೂಲದ 1996ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್, ಮಂಗಳೂರು ನಗರಕ್ಕೆ ಕಮಿಷನರೇಟ್ ಸ್ಥಾಪನೆಯಾದಾಗ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000 ರಿಂದ 2004ರ ವರೆಗೆ ದಕ್ಷಿಣ ಕನ್ನಡದ ಎಸ್ಪಿಯಾಗಿ ಸೇವೆ ಸಲ್ಲಿಸಿ, ನಂತರ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಇದಕ್ಕೂ ಹಿಂದೆ ಅವರು ಬೆಂಗಳೂರು ಕೇಂದ್ರ ವಿಭಾಗದ ಐಜಿಪಿ, ನಕ್ಸಲ್ ನಿಗ್ರಹ ಪಡೆಯ ಕಮಾಂಡರ್ (ANF) ಹಾಗೂ ಡಿಐಜಿ ಹುದ್ದೆಗಳಲ್ಲಿ ಕೆಲಸ ಮಾಡಿದ್ದು, ಇತ್ತೀಚೆಗೆ ಬೆಂಗಳೂರಿನ ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಐಪಿಎಲ್ ವಿಜಯೋತ್ಸವದ ವೇಳೆ ನಡೆದ ಅವ್ಯವಸ್ಥೆಯಿಂದಾಗಿ ಜನಜೀವನದ ಮೇಲೆ ಪರಿಣಾಮ ಬೀರಿದ ಸಂದರ್ಭದಲ್ಲಿಯೇ ಈ ಬದಲಾವಣೆ ನಡೆದಿದೆ. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ಶಿಸ್ತಿಗೆ ಒತ್ತಡ ನೀಡಿದೆ.