
ಕಾರ್ಕಳ: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಹಟ್ಟಿಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ನಲ್ಲೂರು ಗ್ರಾಮದ ಬೋರ್ಕಟ್ಟೆಯ ಮೊಹಮ್ಮದ್ ಯೂನಿಸ್ (31), ಮೂಡಬಿದ್ರೆ ಕಲ್ಲಬೆಟ್ಟುವಿನ ಮೊಹಮ್ಮದ್ ನಾಸೀರ್ (28), ಮತ್ತು ಮೂಡಬಿದ್ರೆ ಪುತ್ತಿಗೆ ಗ್ರಾಮದ ಮಿಜಾರಿನ ಮೊಹಮ್ಮದ್ ಇಕ್ಬಾಲ್ (29) ಎಂದು ಗುರುತಿಸಲಾಗಿದೆ.
ಕೃತ್ಯದ ವಿವರ ಮತ್ತು ವಶಪಡಿಸಿಕೊಂಡ ವಸ್ತುಗಳು
ಸೆಪ್ಟೆಂಬರ್ 28ರ ರಾತ್ರಿ, ಮೂವರು ಅಪರಿಚಿತ ವ್ಯಕ್ತಿಗಳು ಜಯಶ್ರೀ ಎಂಬುವವರ ಮನೆಯ ದನದ ಕೊಟ್ಟಿಗೆಗೆ ತಲವಾರುಗಳೊಂದಿಗೆ ನುಗ್ಗಿ, ಬೆದರಿಸಿ ಸುಮಾರು ₹35,000 ಮೌಲ್ಯದ 3 ಹಸುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 2 ತಲವಾರು, ಕಾರು, ಬೊಲೆರೊ ವಾಹನ ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹5,87,000 ಎಂದು ಅಂದಾಜಿಸಲಾಗಿದೆ.
ಪೊಲೀಸ್ ಕಾರ್ಯಾಚರಣೆ
ಈ ಪ್ರಕರಣದ ತನಿಖೆಗಾಗಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ. ಹರ್ಷಾ ಪ್ರಿಯಂವದಾ ಅವರ ಮಾರ್ಗದರ್ಶನದಲ್ಲಿ, ತನಿಖಾಧಿಕಾರಿ ಮಂಜಪ್ಪ ಡಿ.ಆರ್ ಮತ್ತು ಅಜೆಕಾರು ಠಾಣಾ ಎಸ್ಸೈ ಮಹೇಶ್ ಟಿ.ಎಂ. ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಾರ್ಯಾಚರಣೆಯಲ್ಲಿ ಅಜೆಕಾರು, ಹೆಬ್ರಿ ಮತ್ತು ಕಾರ್ಕಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ಭಾಗವಹಿಸಿದ್ದರು.



































