
ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೆಳೆಯರ ನಡುವಿನ ಕ್ಷುಲ್ಲಕ ಜಗಳವೊಂದು ವಿಕೋಪಕ್ಕೆ ತಿರುಗಿ, SSLC ವಿದ್ಯಾರ್ಥಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಮಂಗಳವಾರ ನಡೆದಿದೆ.
ಶಿವಮೊಗ್ಗದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಸಂಕೇತ್ ಮೃತಪಟ್ಟ ದುರ್ದೈವಿ. ಪರೀಕ್ಷೆಗಳು ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ತರಗತಿ ಮುಗಿಸಿ ಸಂಕೇತ್ ಮನೆಗೆ ಮರಳುತ್ತಿದ್ದನು. ಈ ವೇಳೆ ಶಾಲೆಯಿಂದ ಸ್ವಲ್ಪ ದೂರದಲ್ಲಿಯೇ ಈತನನ್ನು ತಡೆದ 3 ರಿಂದ 4 ಬಾಲಕರ ಗುಂಪು ಹಲ್ಲೆ ನಡೆಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಲೆಯನ್ನು ಅರ್ಧಕ್ಕೆ ಬಿಟ್ಟಿದ್ದ (ಡ್ರಾಪ್ಔಟ್) ಕೆಲವು ಬಾಲಕರು ಹಳೆಯ ದ್ವೇಷ ಅಥವಾ ಕ್ಷುಲ್ಲಕ ಕಾರಣಕ್ಕೆ ಸಂಕೇತ್ ಮೇಲೆ ಆಕ್ರಮಣ ಮಾಡಿದ್ದಾರೆ ಎನ್ನಲಾಗಿದೆ.
ಜಗಳದ ವೇಳೆ ತೀವ್ರವಾಗಿ ಹಲ್ಲೆಗೊಳಗಾದ ಬಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದುರಾದೃಷ್ಟವಶಾತ್ ಆತ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೆಳೆಯರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಕೈಯಿಂದ ಗುದ್ದಿದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.



































