
ಸಿದ್ದಾಪುರ (ಕೊಡಗು): ಗೌರಿಬೆಟ್ಟದ ಕಾಫಿ ತೋಟವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಒಂಟಿ ಸಲಗದ ದಾಳಿಗೆ ಸಿಲುಕಿ ಹಿರಿಯ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಗೌರಿಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಹುಂಡಿ ನಿವಾಸಿಯಾದ ಲತೀಫ್ (65) ಎಂದು ಗುರುತಿಸಲಾಗಿದೆ.
ಗುರುವಾರ ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ಲತೀಫ್ ಅವರು ಬಜೆಗೊಲ್ಲಿ ಪ್ರದೇಶದ ಕಾಫಿ ತೋಟದಲ್ಲಿ ಕರ್ತವ್ಯದಲ್ಲಿದ್ದಾಗ, ಮರಗಳ ಮರೆಯಿಂದ ಏಕಾಏಕಿ ನುಗ್ಗಿ ಬಂದ ಕಾಡಾನೆ ಅವರ ಮೇಲೆರಗಿದೆ. ಆನೆಯ ಅನಿರೀಕ್ಷಿತ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಲತೀಫ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಹೊಂದಿದ್ದು, ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ಈ ದುರಂತದಿಂದ ಆಕ್ರೋಶಗೊಂಡಿರುವ ಗೌರಿಬೆಟ್ಟದ ಗ್ರಾಮಸ್ಥರು, ಅರಣ್ಯ ಇಲಾಖೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದ್ದರೂ ಇಲಾಖೆ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ, ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಬರಬೇಕಾದ ಗರಿಷ್ಠ ಪರಿಹಾರವನ್ನು ಶೀಘ್ರವಾಗಿ ವಿತರಿಸುವ ಭರವಸೆ ನೀಡಿದ್ದಾರೆ. ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರಣ್ಯ ಪಡೆಯು ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಆರಂಭಿಸಿದೆ.



































