
ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ಅವರು ಸೋಮವಾರ (ಅ. 27) ಮಹತ್ವದ ಹೇಳಿಕೆ ನೀಡಿದ್ದಾರೆ. “ಹೈಕಮಾಂಡ್ ತೀರ್ಮಾನ ಮಾಡಿದರೆ, ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ” ಎಂದು ಅವರು ಹೇಳಿದ್ದಾರೆ.
ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, “ಸ್ಪರ್ಧೆ ಎಂಬುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಹಕ್ಕು. ಆದರೆ, ಮುಖ್ಯಮಂತ್ರಿ ಸ್ಥಾನದ ಕುರಿತು ಅಂತಿಮವಾಗಿ ಹೈಕಮಾಂಡ್ ಯಾವ ತೀರ್ಮಾನ ಮಾಡುತ್ತದೆ ಎಂಬುದರ ಮೇಲೆ ನನ್ನ ಮುಂದುವರಿಕೆ ನಿಂತಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಕಲ್ಲಡ್ಕ ಭಟ್ ಪ್ರಕರಣಕ್ಕೆ ಪ್ರತಿಕ್ರಿಯೆ
ಇದೇ ಸಂದರ್ಭದಲ್ಲಿ, ಆರ್.ಎಸ್.ಎಸ್. ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. “ದ್ವೇಷದ ಭಾಷಣ ಮಾಡುವವರು ಯಾರೇ ಆದರೂ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಎಫ್ಐಆರ್ ದಾಖಲು ಮಾಡುತ್ತೇವೆ” ಎಂದು ಅವರು ದೃಢವಾಗಿ ಹೇಳಿದರು.



































