
ಮೈಸೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಊಹಾಪೋಹಗಳಿಗೆ ಮತ್ತು ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಮತ್ತು ದಿಟ್ಟ ಉತ್ತರ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ತಮ್ಮ ಮುಂದುವರಿಕೆಯ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಪುನರುಚ್ಚರಿಸಿದ ಅವರು, “ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಮತ್ತು ಇನ್ನೂ ಎರಡು ಬಜೆಟ್ಗಳನ್ನು ಮಂಡಿಸುತ್ತೇನೆ. ನಿಮಗೆ ಯಾಕೆ ಅನುಮಾನ? ಯಾಕೆ ಮತ್ತೆ ಮತ್ತೆ ಈ ಪ್ರಶ್ನೆಯನ್ನು ಕೇಳುತ್ತೀರಿ?” ಎಂದು ಪ್ರಶ್ನಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.
ಕುತೂಹಲಕ್ಕೆ ಕಾರಣವಾದ ಬೆಳವಣಿಗೆಗಳು
ರಾಜ್ಯ ಸರ್ಕಾರವು 2.5 ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತರು ದೆಹಲಿಗೆ ಪ್ರಯಾಣ ಬೆಳೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಈ ಮಧ್ಯೆ, ಡಿ.ಕೆ. ಸುರೇಶ್ ಅವರು, “ಕೊಟ್ಟ ವಚನವನ್ನು ಪಾಲಿಸುವುದು ಮುಖ್ಯಮಂತ್ರಿಗಳ ಕರ್ತವ್ಯ” ಎಂದು ಮಾರ್ಮಿಕವಾಗಿ ಹೇಳಿಕೆ ನೀಡಿದ್ದು, ಸಂಚಲನವನ್ನುಂಟು ಮಾಡಿತ್ತು.
ಹೈಕಮಾಂಡ್ ತೀರ್ಮಾನವೇ ಅಂತಿಮ
ಶುಕ್ರವಾರ, ನವೆಂಬರ್ 21 ರಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಕುರಿತು ಹೈಕಮಾಂಡ್ ಇಲ್ಲಿಯವರೆಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು. “ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಹಾಗಾದರೆ ಮತ್ತೆ ಯಾಕೆ ಆ ಪ್ರಶ್ನೆ? ಹೈಕಮಾಂಡ್ ಹೇಳುವುದನ್ನು ನಾನು ಮತ್ತು ಎಲ್ಲಾ ಶಾಸಕರು ಪಾಲಿಸಬೇಕು” ಎಂದು ಅವರು ಒತ್ತಿ ಹೇಳಿದರು.
ಕೊಟ್ಟ ಮಾತಿಗೆ ತಪ್ಪಿಲ್ಲ: ಡಿ.ಕೆ ಬ್ರದರ್ಸ್ಗೆ ಪರೋಕ್ಷ ಟಾಂಗ್
ಡಿ.ಕೆ. ಸುರೇಶ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಹೌದು, ನಾನು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಕೊಟ್ಟ ಮಾತಿನಂತೆ ಈಗಾಗಲೇ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ ಮತ್ತು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇನೆ” ಎಂದು ಹೇಳುವ ಮೂಲಕ ಡಿ.ಕೆ ಸಹೋದರರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ದೆಹಲಿಗೆ ಹೋಗಿರುವ ಸಚಿವ ಚಲುವರಾಯಸ್ವಾಮಿ ಅವರ ಬಗ್ಗೆಯೂ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಅವರು ಇಲಾಖೆಯ ಕೆಲಸದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿದ್ದಾರೆಂದು ಅವರೇ ತಮಗೆ ತಿಳಿಸಿದ್ದಾರೆ. ಸಚಿವರು ಮತ್ತು ಶಾಸಕರು ದೆಹಲಿಗೆ ಹೋಗಬಾರದಾ? ಎಂದು ಮರುಪ್ರಶ್ನಿಸಿದ ಅವರು, ಈ ಬಗ್ಗೆ ಡಿ.ಕೆ. ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದು, ತಾನು ಮತ್ತೆ ವಿವರಣೆ ನೀಡುವ ಅಗತ್ಯವಿಲ್ಲ ಎಂದರು. ಅಷ್ಟೇ ಅಲ್ಲದೆ, ನಾಳೆ (ಶನಿವಾರ) ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುವುದಾಗಿ ತಿಳಿಸಿದರು.
ಮೆಕ್ಕೆಜೋಳ ಖರೀದಿ ಮತ್ತು ಕೇಂದ್ರದ ನೀತಿಗೆ ಆಕ್ಷೇಪ
ರೈತರ ಸಮಸ್ಯೆಗಳ ಕುರಿತು ಮಾತನಾಡಿದ ಸಿಎಂ, ಮೆಕ್ಕೆಜೋಳದ ಬೆಂಬಲ ಬೆಲೆ (MSP) ಕುರಿತು ಸಭೆ ನಡೆಸಲಾಗಿದೆ. ಮೆಕ್ಕೆಜೋಳಕ್ಕೆ 2400 ಬೆಂಬಲ ಬೆಲೆ ನಿಗದಿಪಡಿಸಿದ್ದರೂ ಖರೀದಿ ಕೇಂದ್ರಗಳನ್ನು ಸ್ಥಾಪಿಸಿರಲಿಲ್ಲ. ಮಾರುಕಟ್ಟೆಯಲ್ಲಿ ಬೆಲೆ ಕುಸಿತಗೊಂಡಿದ್ದರಿಂದ ಖರೀದಿ ಕೇಂದ್ರಗಳನ್ನು ತೆರೆಯಲು ರೈತರು ಒತ್ತಾಯಿಸಿದ್ದರು ಎಂದು ತಿಳಿಸಿದರು.
ಈ ವರ್ಷ ಕರ್ನಾಟಕದಲ್ಲಿ ಅಂದಾಜು 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಉತ್ಪಾದನೆಯಾಗಿದೆ. ಆದರೆ ಕೇಂದ್ರ ಸರ್ಕಾರವು 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿರುವುದಕ್ಕೆ ಸಿಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. “ಇಷ್ಟೊಂದು ಉತ್ಪಾದನೆಯಿದ್ದರೂ ಆಮದು ಮಾಡಿಕೊಳ್ಳುವ ಅಗತ್ಯವಿರಲಿಲ್ಲ. ರಾಜ್ಯದಲ್ಲಿಯೇ ಖರೀದಿ ಮಾಡಬಹುದಿತ್ತು. ಕೇಂದ್ರ ಸರ್ಕಾರ ಖರೀದಿ ಪ್ರಕ್ರಿಯೆ ಮಾಡಿಲ್ಲ. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮೆಕ್ಕೆಜೋಳ ಖರೀದಿಸಿದ ಡಿಸ್ಟಿಲರಿಗಳು ನಿಯಮ ಉಲ್ಲಂಘನೆ ಮಾಡಿವೆ. ಅವರೊಂದಿಗೆ ಮಾತನಾಡಿ ಖರೀದಿಸಲು ಸೂಚನೆ ನೀಡಿದ್ದೇನೆ” ಎಂದರು.
ಸರ್ಕಾರವು ರೈತರಿಗೆ ಎಲ್ಲಾ ರೀತಿಯ ಸಹಾಯ ಮಾಡುತ್ತದೆ ಎಂದು ಭರವಸೆ ನೀಡಿದ ಅವರು, ಮಾರ್ಕೆಟಿಂಗ್ ಫೆಡರೇಷನ್ಗೆ 10ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಖರೀದಿಸಲು ಸೂಚನೆ ನೀಡಲಾಗಿದೆ. ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಆದೇಶ ನೀಡಲಾಗಿದೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಹೆಚ್ಚು ಬೆಳೆದಿರುವುದರಿಂದ ಹೊರಗಡೆಯಿಂದ ಮೆಕ್ಕೆಜೋಳ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು. ಈ ಕುರಿತು ಹಣಕಾಸು ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.



































