
ಶಿಡ್ಲಘಟ್ಟ: ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಸ್ಥಳೀಯ ರಾಜಕಾರಣಿಯನ್ನು ಪೋಲೀಸರು ಸಿನಿಮಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.
ವಿವರವಾದ ವರದಿ:
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರ ಮೇಲೆ ದರ್ಪ ತೋರಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಂತಿಮವಾಗಿ ಕಾನೂನು ಬಲೆಗೆ ಬಿದ್ದಿದ್ದಾನೆ. ನಗರದ ಪ್ರಮುಖ ವೃತ್ತವೊಂದರಲ್ಲಿ ಸಂಚಾರಕ್ಕೆ ಅಡ್ಡಿಯಾಗುವಂತೆ ಯಾವುದೇ ಪೂರ್ವಾನುಮತಿ ಇಲ್ಲದೆ ಅಕ್ರಮವಾಗಿ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಪೌರಾಯುಕ್ತರು ನಿಯಮಾನುಸಾರ ಅವುಗಳನ್ನು ತೆರವುಗೊಳಿಸಲು ಸಿಬ್ಬಂದಿಗೆ ಸೂಚಿಸಿದ್ದರು.
ತಾನು ಹಾಕಿದ್ದ ಬ್ಯಾನರ್ ತೆರವು ಮಾಡಿದ್ದರಿಂದ ಆಕ್ರೋಶಗೊಂಡ ರಾಜೀವ್ ಗೌಡ, ನೇರವಾಗಿ ಕಚೇರಿಗೆ ನುಗ್ಗಿ ಮಹಿಳಾ ಅಧಿಕಾರಿಯ ಮೇಲೆ ಏಕವಚನದಲ್ಲಿ ಪ್ರಹಾರ ನಡೆಸಿದ್ದಲ್ಲದೆ, ಪ್ರಾಣ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಮೃತಾ ಗೌಡ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು 1 ಪ್ರಕರಣ ದಾಖಲಿಸಿಕೊಂಡಿದ್ದರು. ಎಫ್ಐಆರ್ ದಾಖಲಾಗುತ್ತಿದ್ದಂತೆ ಬಂಧನದಿಂದ ತಪ್ಪಿಸಿಕೊಳ್ಳಲು ರಾಜೀವ್ ಗೌಡ ರಾಜ್ಯ ಬಿಟ್ಟು ಪರಾರಿಯಾಗಿದ್ದನು. ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯ ಚಲನವಲನ ಗಮನಿಸಿದ ಪೋಲೀಸರು, ಕೇರಳದ ಗಡಿ ಭಾಗದಲ್ಲಿ ಆತನನ್ನು ಸುತ್ತುವರಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ.



































