
ಉಡುಪಿ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕೌಶಲ್ಯ ತರಬೇತಿಗಳು ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶ್ಲಾಘನೀಯ ಕಾರ್ಯ ಮಾಡುತ್ತಿದೆ ಎಂದು ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ವಾಸುದೇವ ಭಟ್ ತಿಳಿಸಿದರು. ದೊಡ್ಡಣಗುಡ್ಡೆಯ ಅಶ್ವತ್ಥ ಕಟ್ಟೆ ಗ್ರೀನ್ ರೂಮ್ನಲ್ಲಿ ನಡೆದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ನಡೆದ ಈ ತರಬೇತಿಯು ಮಹಿಳೆಯರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದೆ. ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ವಲಯದ ಶಿವಳ್ಳಿ ಸಿ ಒಕ್ಕೂಟದ ಉಪಾಧ್ಯಕ್ಷೆ ಸುಮಿತ್ರಾ ಅವರು ತರಬೇತಿಯ ಪ್ರಯೋಜನವನ್ನು ಪಡೆದು ಆದಾಯದ ಮೂಲ ಕಂಡುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿ, ಕ್ಷೇತ್ರ ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಮಾತನಾಡಿ, ತರಬೇತಿ ಪಡೆದ ಪ್ರತಿಯೊಬ್ಬ ಮಹಿಳೆಯಲ್ಲೂ ಇಂದು ಯಶಸ್ವಿ ಟೈಲರ್ ಆಗುವ ಆತ್ಮವಿಶ್ವಾಸ ಎದ್ದು ಕಾಣುತ್ತಿದೆ ಎಂದು ಶುಭ ಹಾರೈಸಿದರು. ಹೊಲಿಗೆ ಶಿಕ್ಷಕಿ ರೀನಾ ಅವರು ಸಂಸ್ಥೆಯಲ್ಲಿ ಲಭ್ಯವಿರುವ ಇತರ ಸ್ಕಿಲ್ ಡೆವಲಪ್ಮೆಂಟ್ ತರಬೇತಿಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಪುಷ್ಪಾ ಮತ್ತು ನೇತ್ರಾವತಿ ತಮ್ಮ ಅನಿಸಿಕೆ ಹಂಚಿಕೊಂಡರು.





































