
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಕೋಮು ಸಂಘರ್ಷ ತಡೆಯುವ ಉದ್ದೇಶದಿಂದ ರಚಿಸಲಾದ ವಿಶೇಷ ಕಾರ್ಯಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್)ಗೆ ಜೂನ್ 13 ರಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಈ ವಿಶೇಷ ಕಾರ್ಯಪಡೆ ತನ್ನ ಕಚೇರಿ ಕಾರ್ಯಾಚರಣೆಯನ್ನು ನಿರ್ವಹಿಸಲಿದೆ.
ಉದ್ಘಾಟನಾ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ’ಸೋಜಾ ಹಾಗೂ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಡಾ. ಅರುಣ್ ಕೆ ಮತ್ತು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವಿಶೇಷ ಕಾರ್ಯಪಡೆ, ದ.ಕ., ಉಡುಪಿ ಮತ್ತು ಸುತ್ತಮುತ್ತಲಿನ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.