
ಯಲ್ಲಾಪುರ: ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ಮಧ್ಯಾಹ್ನ ಹಾಡಹಗಲೇ ಅಮಾನವೀಯ ಘಟನೆಯೊಂದು ಜರುಗಿದೆ. ಪ್ರೀತಿಯ ಹೆಸರಿನಲ್ಲಿ ಪೀಡಿಸುತ್ತಿದ್ದ ವ್ಯಕ್ತಿಯೊಬ್ಬ, ತನ್ನ ಆಸೆಗೆ ಒಪ್ಪದ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಘಟನೆಯ ವಿವರ: ಮೃತಪಟ್ಟ ದುರ್ದೈವಿ ರಂಜಿತಾ ಬನ್ಸೊಡೆ (30) ಅವರು ಸ್ಥಳೀಯ ಶಾಲೆಯೊಂದರಲ್ಲಿ ಬಿಸಿಯೂಟದ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ವಿಚ್ಛೇದಿತರಾಗಿದ್ದ ರಂಜಿತಾ ಅವರಿಗೆ 10 ವರ್ಷದ ಮಗುವಿದ್ದು, ಅಕ್ಕನ ಮನೆಯಲ್ಲಿ ಆಸರೆ ಪಡೆದಿದ್ದರು. ಆರೋಪಿ ರಫೀಕ್ ಎಂಬಾತ ಕಳೆದ ಕೆಲವು ಸಮಯದಿಂದ ರಂಜಿತಾಳನ್ನು ಮದುವೆಯಾಗುವಂತೆ ಒತ್ತಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಶನಿವಾರ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಾಳಮ್ಮನಗರದ ಬಳಿ ರಫೀಕ್ ಆಕೆಯನ್ನು ಅಡ್ಡಗಟ್ಟಿ, ಮನಬಂದಂತೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ರಂಜಿತಾಳನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ.
ಪ್ರತಿಭಟನೆ ಮತ್ತು ಬಂದ್ ಕರೆ: ಈ ಕೃತ್ಯದ ಸುದ್ದಿ ಹರಡುತ್ತಿದ್ದಂತೆಯೇ ಪಟ್ಟಣದಲ್ಲಿ ಆಕ್ರೋಶದ ಅಲೆ ಎದ್ದಿದೆ. ಆರೋಪಿ ರಫೀಕ್ನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿವೆ. ಘಟನೆಯನ್ನು ಖಂಡಿಸಿ ಜನವರಿ 4ರ ಭಾನುವಾರ ಯಲ್ಲಾಪುರ ಬಂದ್ಗೆ ಕರೆ ನೀಡಲಾಗಿದ್ದು, ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸದ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.













