
ಉಜಿರೆ: ಸುಬ್ರಹ್ಮಣ್ಯ ಮಠದ ಪರಮ ಪೂಜ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಅವರ ಕುಟುಂಬ ಸದಸ್ಯರು ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿದರು.
ಸುಬ್ರಹ್ಮಣ್ಯ ಮಠದಿಂದ ಆಗಮಿಸಿದ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ನಂತರ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರಿಗೆ ಪಾದಪೂಜೆ ನೆರವೇರಿಸಲಾಯಿತು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಹಾಗೂ ಫಲಕಾಣಿಕೆ ನೀಡಿ ಗೌರವ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಸುಬ್ರಹ್ಮಣ್ಯ ದೇವಾಲಯದ ಪ್ರಸಾದವನ್ನು ನೀಡಿ ಆಶೀರ್ವಾದಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆಗೆ ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ದೇವಾಲಯದಲ್ಲಿ ದೇವರ ದರ್ಶನ ಪಡೆದ ಬಳಿಕ ಪೂಜ್ಯ ಸ್ವಾಮೀಜಿಯವರು ಸುಬ್ರಹ್ಮಣ್ಯಕ್ಕೆ ಮರುಪ್ರಯಾಣ ಮಾಡಿದರು. ಈ ಭೇಟಿಯು ಎರಡೂ ಧಾರ್ಮಿಕ ಕ್ಷೇತ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿದೆ.



































