
ಸುಳ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದ ಸುಳ್ಯ ಮೂಲದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರಂತ ಘಟನೆ ಮಾರಿಷಸ್ ದೇಶದಲ್ಲಿ ಸಂಭವಿಸಿದೆ.
ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತ ವಿದ್ಯಾರ್ಥಿ.
ನಂದನ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿ ‘ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ’ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆ ನಿನ್ನೆ (ಅ. 13) ನಡೆದಿದ್ದು, ಜಲಪಾತ ವೀಕ್ಷಣೆಗೆ ತೆರಳಿದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಮೃತದೇಹ ತರಲು ಮನವಿ
ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು, ಮೃತದೇಹವನ್ನು ಮಾರಿಷಸ್ ಸರ್ಕಾರದ ವ್ಯವಸ್ಥೆ ಹಾಗೂ ಭಾರತ ಸರ್ಕಾರದ ಸಹಾಯದಿಂದ ಸ್ವದೇಶಕ್ಕೆ ಕರೆತರಲು ವ್ಯವಸ್ಥೆ ಮಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.
ಮನವಿಗೆ ಸ್ಪಂದಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು, ತಕ್ಷಣವೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಸಹ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ ಅಗತ್ಯ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ.