
ಶಿರಸಿ (ಉತ್ತರ ಕನ್ನಡ): ಜಿಲ್ಲೆಯ ಶಿರಸಿ ತಾಲೂಕಿನ ಹೆಗಡೆಕಟ್ಟಾದ ಯುವ ಪ್ರತಿಭೆ ಸುಮಂತ್ ಮಂಜುನಾಥ್ ನಾಯ್ಕ್ ಅವರು ಕೇವಲ 25 ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಪ್ರಕಟಿಸಿದ ಸಿವಿಲ್ ಜಡ್ಜ್ ನೇಮಕಾತಿಯ ಅಂತಿಮ ಆಯ್ಕೆಪಟ್ಟಿಯಲ್ಲಿ ಸುಮಂತ್ ಅವರು ಇಡೀ ರಾಜ್ಯಕ್ಕೆ 2 ನೇ ರ್ಯಾಂಕ್ ಪಡೆಯುವ ಮೂಲಕ ಉತ್ತರ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ವಿಶೇಷವೆಂದರೆ, ಅವರು ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಈ ಗೌರವಾನ್ವಿತ ಹುದ್ದೆಯನ್ನು ಅಲಂಕರಿಸುತ್ತಿದ್ದಾರೆ.
ಡಿಸೆಂಬರ್ 2025 ರಲ್ಲಿ ನಡೆದ ಲಿಖಿತ ಪರೀಕ್ಷೆ ಹಾಗೂ ಜನವರಿ 2026 ರಲ್ಲಿ ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಮಂತ್, 83 ಅಭ್ಯರ್ಥಿಗಳ ಅಂತಿಮ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಬೆಂಗಳೂರು ಲೋಕಾಯುಕ್ತದ ಸರ್ಕಾರಿ ಅಭಿಯೋಜಕ ಮಂಜುನಾಥ್ ನಾಯ್ಕ್ ಮತ್ತು ವಕೀಲೆ ಸುಜಾತಾ ನಾಯ್ಕ್ ದಂಪತಿಯ ಪುತ್ರನಾಗಿರುವ ಇವರಿಗೆ ಕಾನೂನು ಕ್ಷೇತ್ರವು ರಕ್ತಗತವಾಗಿ ಬಂದಂತಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಚುರುಕಾಗಿದ್ದ ಸುಮಂತ್ ಅವರ ಈ ಸಾಧನೆಯು ಜಿಲ್ಲೆಯ ಯುವ ಪೀಳಿಗೆಗೆ ಮಾದರಿಯಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ತಾಲೂಕಿನಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.



































