
ಹಾಸನ: ಪ್ರಸಿದ್ಧ ಹಾಸನಾಂಬೆ ದೇವಿ ದೇವಸ್ಥಾನದ ಗರ್ಭಗುಡಿ ಬಾಗಿಲು ಇದೀಗ ತೆರೆದಿದ್ದು, ವಾರ್ಷಿಕ ಜಾತ್ರೆಗೆ ಶುಭಾರಂಭ ನೀಡಲಾಗಿದೆ.
ಪ್ರಧಾನ ಅರ್ಚಕ ನಾಗರಾಜ್ ಅವರ ನೇತೃತ್ವದಲ್ಲಿ ಅರ್ಚಕರ ತಂಡವು ಮುತ್ತೈದೆಯರ ಜೊತೆಗೆ ಮಂಗಳವಾದ್ಯಗಳ ಸಮೇತ ದೇವಾಲಯಕ್ಕೆ ಪೂಜಾ ಸಾಮಗ್ರಿಗಳನ್ನು ತಂದರು. ಅರ್ಚಕರು ವಿಶೇಷ ಪೂಜೆ ನೆರವೇರಿಸಿದ ಬಳಿಕ ದೇವಸ್ಥಾನದ ಬಾಗಿಲು ತೆರೆಯಲಾಯಿತು.
ಈ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಗೂ ಹಾಸನ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ದೇವಿ ದರ್ಶನಕ್ಕಾಗಿ ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದು ವಾಡಿಕೆ. ಅಕ್ಟೋಬರ್ 23 ರವರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ. ಈ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಜಿಲ್ಲಾಡಳಿತದ ವತಿಯಿಂದ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.



































