
ಉಡುಪಿ, ಏಪ್ರಿಲ್ 8 : ಉಡುಪಿ ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಪ್ರಾರಂಭವಾಗಿದ್ದ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿ ಅನುದಾನ ಕೊರತೆಯಿಂದಾಗಿ ಸ್ಥಗಿತಗೊಂಡಿರುವ ವಿಷಯಕ್ಕೆ ಇದೀಗ ಮತ್ತೊಮ್ಮೆ ಚಾಲನೆ ಮೂಡಿದೆ.
ಡಾ. ಪಿ ವಿ ಭಂಡಾರಿ ಅವರ ಮಾರ್ಗದರ್ಶನದಲ್ಲಿ KYC ಉಡುಪಿ ಹಾಗೂ ಇತರ ಸಂಘ-ಸಂಸ್ಥೆಗಳ ಸಮೂಹ ಹೋರಾಟದ ಫಲವಾಗಿ, ಹಿಂದಿನ ಸರ್ಕಾರ 150 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿತ್ತು. ಅದರಂತೆ ಕಟ್ಟಡ ಕಾಮಗಾರಿ ಪ್ರಾರಂಭವಾದರೂ, ಇದೀಗ 40 ಕೋಟಿ ರೂ. ಅನುದಾನದ ಕೊರತೆಯಿಂದ ಕಾಮಗಾರಿ ಅಪೂರ್ಣವಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ KYC ಉಡುಪಿ ಸದಸ್ಯರು, ಕಾಮಗಾರಿಗಾಗಿ ತಕ್ಷಣ ಬಾಕಿ ಇರುವ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿದರು.
ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಸಚಿವರು, ವಿಶೇಷ ಮನವಿಯೊಂದಿಗಾಗಿ ಮರುಭೇಟಿಗೆ ಆಹ್ವಾನ ನೀಡಿದ್ದು, ಸಂಬಂಧಿತ ಕಡತ ಪರಿಶೀಲನೆಯ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭ ಕರಾವಳಿ ಯೂತ್ ಕ್ಲಬ್ ರಿ. ಉಡುಪಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶೀಘ್ರದಲ್ಲೇ ಅನುದಾನ ಬಿಡುಗಡೆ ಮೂಲಕ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರಿಗೆ ಆಸ್ಪತ್ರೆ ಲಭ್ಯವಾಗುವ ನಿರೀಕ್ಷೆಯಿದೆ.