
ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಮೇಲಿನ ಇಂದ್ರಾಳಿ ಮೇಲ್ಸೇತುವೆಯು ಸೆಪ್ಟೆಂಬರ್ 22ರಿಂದ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶುಕ್ರವಾರ ಶಾಸಕ ಯಶಪಾಲ್ ಸುವರ್ಣ ಅವರೊಂದಿಗೆ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಈ ಮಾಹಿತಿ ನೀಡಿದರು.
ಇಂದ್ರಾಳಿ ಮೇಲ್ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ನವರಾತ್ರಿಯ ಮೊದಲ ದಿನದಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು. ಇದೇ ವೇಳೆ, ಮಳೆಯಿಂದಾಗಿ ಮುಂದೂಡಲ್ಪಟ್ಟಿದ್ದ ಕೆಳಪರ್ಕಳ ರಸ್ತೆ ದುರಸ್ತಿ ಕಾಮಗಾರಿ ಸೋಮವಾರದಿಂದ ಪ್ರಾರಂಭವಾಗಲಿದ್ದು, ಒಂದು ವಾರದೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.



































