
ಮುಂಬರುವ ನ್ಯೂಜಿಲ್ಯಾಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದ್ದು, ಆಯ್ಕೆ ಸಮಿತಿಯು ಕೆಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು ಏಕದಿನ ತಂಡದಿಂದ ಕೈಬಿಡುವ ಸಾಧ್ಯತೆ ಹೆಚ್ಚಿದೆ. ಆಗಸ್ಟ್ 2024ರಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದ ನಂತರ ಪಂತ್ ಯಾವುದೇ ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿಲ್ಲ. ಇತ್ತೀಚಿನ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಿದ್ದರೂ, ಅಂತಿಮ 11ರ ಬಳಗದಲ್ಲಿ ಅವರಿಗೆ ಅವಕಾಶ ಸಿಕ್ಕಿರಲಿಲ್ಲ.
ಕಿಶನ್ ಅಬ್ಬರಕ್ಕೆ ತೆರೆದ ಅವಕಾಶದ ಬಾಗಿಲು ಪಂತ್ ಅವರ ಫಾರ್ಮ್ ಕುಸಿತ ಮತ್ತು ದೇಶೀಯ ಕ್ರಿಕೆಟ್ನಲ್ಲಿ ಇಶಾನ್ ಕಿಶನ್ ಅವರ ಅಸಾಧಾರಣ ಪ್ರದರ್ಶನ ಈ ಬದಲಾವಣೆಗೆ ಮುಖ್ಯ ಕಾರಣ ಎನ್ನಲಾಗಿದೆ. ಜಾರ್ಖಂಡ್ ಮೂಲದ ಕಿಶನ್ ಇತ್ತೀಚೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ಮಿಂಚಿದ್ದರು. ಅಷ್ಟೇ ಅಲ್ಲದೆ, ಡಿಸೆಂಬರ್ 24ರಂದು ಕರ್ನಾಟಕದ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಇದು ಲಿಸ್ಟ್-ಎ ಕ್ರಿಕೆಟ್ನಲ್ಲಿ ಭಾರತೀಯ ಆಟಗಾರನೊಬ್ಬ ಬಾರಿಸಿದ 2ನೇ ಅತಿ ವೇಗದ ಶತಕವಾಗಿದೆ. ಈ ಸ್ಫೋಟಕ ಫಾರ್ಮ್ ಗಮನಿಸಿರುವ ಬಿಸಿಸಿಐ, ಅವರನ್ನು ಮತ್ತೆ ಏಕದಿನ ತಂಡಕ್ಕೆ ಕರೆತರಲು ಒಲವು ತೋರಿದೆ.
ಸರಣಿಯ ವೇಳಾಪಟ್ಟಿ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಏಕದಿನ ಸರಣಿಯು ಜನವರಿ 11ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ವಡೋದರಾದಲ್ಲಿ ನಡೆಯಲಿದೆ. ಉಳಿದ ಎರಡು ಪಂದ್ಯಗಳು ರಾಜ್ಕೋಟ್ ಮತ್ತು ಇಂದೋರ್ನಲ್ಲಿ ಜರುಗಲಿವೆ. ನಾಯಕ ಶುಭಮನ್ ಗಿಲ್ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಿರುವುದು ತಂಡಕ್ಕೆ ಹೆಚ್ಚಿನ ಬಲ ತುಂಬಿದೆ.



































